ಮೊಟೆರಾದಲ್ಲಿ ಕರ್ನಾಟಕ ಮತ್ತು ಗುಜರಾತ್ ನಡುವೆ ಈ ಸೀಸನ್ನ ರಣಜಿ ಟ್ರೋಫಿಯ ಎರಡನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಕರ್ನಾಟಕ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲ ಇನ್ನಿಂಗ್ಸ್ ಆರಂಭಿಸಿದ ಗುಜರಾತ್ ತಂಡವನ್ನು 264 ರನ್ಗಳಿಗೆ ಆಲೌಟ್ ಮಾಡುವಲ್ಲಿ ಕರ್ನಾಟಕದ ವೇಗಿಗಳು ಯಶಸ್ವಿಯಾದರು. ಇದಕ್ಕೆ ಉತ್ತರವಾಗಿ ಕರ್ನಾಟಕ ತನ್ನ ಮೊದಲ ಇನಿಂಗ್ಸ್ನಲ್ಲಿ ಮೇಲುಗೈ ಸಾಧಿಸಿದೆ. ತಂಡದ ಪರ ನಾಯಕ ಮಯಾಂಕ್ ಅಗರ್ವಾಲ್ ಪಂದ್ಯದ ಎರಡನೇ ದಿನ ಬಿರುಸಿನ ಶತಕ ಬಾರಿಸಿದ್ದು, ಈ ರಣಜಿ ಸೀಸನ್ನ ಎರಡನೇ ಪಂದ್ಯದಲ್ಲಿ ತಮ್ಮ ಲಯಕಂಡುಕೊಂಡಿದ್ದಾರೆ.
ಈ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಮಯಾಂಕ್ ಅಗರ್ವಾಲ್ 124 ಎಸೆತಗಳನ್ನು ಎದುರಿಸಿ 17 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 109 ರನ್ ಕಲೆಹಾಕಿದರು. ಅಂತಿಮವಾಗಿ ಮಯಾಂಕ್, ಚಿಂತನ್ ಗಜ ಬೌಲಿಂಗ್ನಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ವೈಯಕ್ತಿಕವಾಗಿ ಮಯಾಂಕ್ ಶತಕ ಸಿಡಿಸಿದಲ್ಲದೆ, ಸಹ ಆರಂಭಿಕ ಆರ್. ಸಮರ್ಥ್ ಜೊತೆಗೂಡಿ ಮೊದಲ ವಿಕೆಟ್ಗೆ 231 ಎಸೆತಗಳಲ್ಲಿ 172 ರನ್ಗಳ ಜೊತೆಯಾಟ ಕೂಡ ನಡೆಸಿದರು. ಈ ವೇಳೆ ಸಮರ್ಥ್ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಿದರು.