ಪ್ರತಿನಿಧಿ ವರದಿ ಮದ್ದೂರು
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಬೇಕೆಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ತಹಸೀಲ್ದಾರ್ ಕೆ.ಎಸ್. ಸೋಮಶೇಖರ್ ಸೂಚನೆ ನೀಡಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ಸರ್ಕಾರಿ ಹಬ್ಬದ ರೀತಿಯಲ್ಲಿ ಆಚರಣೆ ಮಾಡಲು ಎಲ್ಲ ಅಧಿಕಾರಿಗಳು ಸನ್ನದರಾಗಬೇಕು. ಎಲ್ಲ ಸರ್ಕಾರಿ ಇಲಾಖೆಗಳ ಕಟ್ಟಡಗಳ ಮೇಲೆ ದೀಪಾಲಂಕಾರ ಮಾಡಬೇಕು ಎಂದು ಸೂಚಿಸಿದರು.
ಏ. 5 ರಂದು ಬಾಬು ಜಗಜೀವನ್ ರಾಮ್ ಜಯಂತಿ ಹಾಗೂ ಏ. 14ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪಟ್ಟಣದ ನರಸಿಂಹಸ್ವಾಮಿ ದೇಗುಲದ ಆವರಣದಿಂದ ಮದ್ದೂರು ಪುರಸಭೆಯವರೆಗೆ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡಿ ಕಾರ್ಯಕ್ರಮವನ್ನು ರೂಪಿಸಬೇಕು. ಐದು ಮಂದಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಅಂದು ಬೆಳಗ್ಗೆ 9 ಗಂಟೆಗೆ ಮೆರವಣಿಗೆ ಹೊರಟು 10 ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ಪುರಸಭೆ ಮುಂಭಾಗ ಹಮ್ಮಿಕೊಳ್ಳಲಾಗುವುದು ಎಂದರು.
ಹಿರಿಯ ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ, ಡಿಎಸ್ಎಸ್ ಜಿಲ್ಲಾ ಸಂಚಾಲಕ ಮದ್ದೂರು ಶಿವು, ದಲಿತ ಮುಖಂಡ ಮರಳಿಗ ಶಿವರಾಜು ಮಾತನಾಡಿದರು. ತಾ.ಪಂ ಇಒ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಕರಿಬಸವಯ್ಯ, ಗ್ರೇಡ್ 2 ತಹಶೀಲ್ದಾರ್ ಸೋಮಶೇಖರ್, ಸಿಪಿಐ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿವಾಕರ್, ಜಾಗೃತಿ ಉಸ್ತುವಾರಿ ಸಮಿತಿಯ ಸದಸ್ಯರಾದ ಚಿದಂಬರ, ಮಧುಸೂದನ್, ಕರ್ನಾಟಕ ಜಾನಪದ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಚಾಮನಹಳ್ಳಿ ಮಂಜು, ತಾಲೂಕು ಮಟ್ಟದ ಅಧಿಕಾರಿಗಳಾದ ಸಿ.ಎಚ್. ಕಾಳೀರಯ್ಯ, ಡಾ. ತಿಮ್ಮೇಗೌಡ, ಮಂಗಳಮ್ಮ, ಕೆ.ಎಂ. ರೇಖಾ, ನಾರಾಯಣ್, ಡಾ. ನಾಗೇಂದ್ರ, ಪ್ರಕಾಶ್ ಗೋರ್ಜಿ, ಮೋಹನ್, ದಲಿತ ಮುಖಂಡರಾದ ಅಗರಲಿಂಗನದೊಡ್ಡಿ ಶಂಕರ್, ರವಿಕುಮಾರ್, ಕೃಷ್ಣಪ್ಪ, ಅರುವನಹಳ್ಳಿ ಸಿದ್ದರಾಜು, ಪುಟ್ಟರಾಮು ಸೇರಿದಂತೆ ಇತರರು ಇದ್ದರು.
ಪೋಟೋ
ಮದ್ದೂರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ತಹಶೀಲ್ದಾರ್ ಕೆ.ಎಸ್. ಸೋಮಶೇಖರ್ ಮಾತನಾಡಿದರು.