ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾದ ರಾಜ್ಯಸಮಿತಿ ಸದಸ್ಯ ವಿ.ಜ್ಞಾನಮೂರ್ತಿ ಸಲಹೆ
ರಾಮನಗರ : ಲೋಕಸಭಾ ಚುನಾವಣೆಯಲ್ಲಿ ಬಂಡವಾಳ ಶಾಹಿಗಳ ಪರವಾಗಿರುವ ಜನವಿರೋಧಿ ಬಿಜೆಪಿ ನೇತೃತ್ವದ ಎನ್ ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಗಳನ್ನು ತಿರಸ್ಕರಿಸಿ ಶೋಷಿತ ಜನರ ಹೋರಾಟದ ದನಿಯಾಗಿರುವ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಅನ್ನು ಬೆಂಬಲಿಸುವಂತೆ ಪಕ್ಷದ ರಾಜ್ಯಸಮಿತಿ ಸದಸ್ಯ ವಿ.ಜ್ಞಾನಮೂರ್ತಿ ತಿಳಿಸಿದರು.
ಚೈತನ್ಯ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಂಡವಾಳ ಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಜನರ ಬಳಿಗೆ ಬರುತ್ತಿವೆ. ಎಸ್ ಯುಸಿಐ(ಸಿ) ಚುನಾವಣೆಯಲ್ಲಿ ಕರ್ನಾಟಕದಲ್ಲಿ 19 ಸೇರಿದಂತೆ ದೇಶದಲ್ಲಿ ಒಟ್ಟು 151 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತಿದೆ ಎಂದು ತಿಳಿಸಿದರು.
ಕಳೆದ 10 ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಜನರ ಬದುಕನ್ನು ಮೂರಾಬಟ್ಟೆಯನ್ನಾಗಿ ಮಾಡಿದೆ. 2014ರಲ್ಲಿ ಬೆಲೆಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಂತಹ ಸಮಸ್ಯೆಗಳ ಕುರಿತು ಅಬ್ಬರಿಸುತ್ತಿದ್ದ ಬಿಜೆಪಿಯು ಈಗ ಸಂಪೂರ್ಣ ಮೌನವಾಗಿದೆ. ಅದರ ಗುಜರಾತ್ ಮಾದರಿ ಮಾಯವಾಗಿದೆ ಎಂದರು.
ಅಂಬಾನಿ, ಅದಾನಿಗಳು ವಿಕಸಿತಗೊಂಡು ಜಗತ್ತಿನ ಅತಿ ಶ್ರೀಮಂತ ಬಂಡವಾಳ ಶಾಹಿಗಳಾಗಿದ್ದಾರೆ. ಅವರ ಬೆಳವಣಿಗೆಯನ್ನೇ ದೇಶದ ಅಭಿವೃದ್ಧಿ ಎಂದು ಬಣ್ಣಿಸುತ್ತಾ ಅಭಿವೃದ್ಧಿ ಎಂಬ ಪರಿಕಲ್ಪನೆಗೆ ಮರುವ್ಯಾಖ್ಯಾನವನ್ನು ಬಿಜೆಪಿ ನೀಡಿದೆ ಎಂದರು.
ಮತಗಳನ್ನು ಸೆಳೆಯಲು ಕೋಮುವಾದದ ಮೂಲಕ ಧ್ರುವೀಕರಣ ಮಾಡಲು ಮಂದಿರ, ಮಸೀದಿ, ಬಾವುಟ, ಸಿಎಎ ಮುಂತಾದ ಬಗೆಬಗೆಯ ದಾರಿಗಳನ್ನು ಬಿಜೆಪಿ ಹುಡುಕುತ್ತಿದೆ. ಚುನಾವಣಾ ಆಯೋಗವನ್ನು ತನ್ನ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು, ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಗೆ ತಿದ್ದುಪಡಿ ತಂದಿದೆ ಎಂದರು.
ಇಂತಹ ಕೋಮುವಾದಿ, ಫ್ಯಾಸೀವಾದಿ, ಬಂಡವಾಳಶಾಹಿ ನೀತಿಗಳ ವಿರುದ್ಧ ಈ ಚುನಾವಣೆಯಲ್ಲಿ ಜನಪರ ಧ್ವನಿ ಮೊಳಗಬೇಕು. ಆದರೆ, ಕಾಂಗ್ರೆಸ್ ನೇತೃತ್ವದ ವಿವಿಧ ಅವಕಾಶವಾದಿ ಪ್ರಾದೇಶಿಕ ಪಕ್ಷಗಳ ಕೂಟವಾದ ‘ಇಂಡಿಯಾ’ ಸೈಜ ಧರ್ಮನಿರಪೇಕ್ಷ, ಪ್ರಜಾತಾಂತ್ರಿಕ ಸರ್ಯಾಯವನ್ನು ನೀಡಲು ಖಂಡಿತ ಸಾಧ್ಯವಿಲ್ಲ. ಬಿಜೆಪಿ ಬೆಳೆದು ಅಧಿಕಾರಕ್ಕೆ ಬರುವವರೆಗೆ ದೇಶದ ಬಂಡವಾಳಶಾಹಿಗಳ ಸೇವೆಗೈದಿರುವುದು ಇದೇ ಕಾಂಗ್ರೆಸ್ ಎನ್ನುವುದರಲ್ಲಿ ಸಂಶಯವಿಲ್ಲ ಎಂದರು.
ಪಕ್ಷದ ಅಭ್ಯರ್ಥಿ ಕೆ. ಹೇಮಾವತಿ ಮಾತನಾಡಿ, ಎಸ್ ಯುಸಿಐ ಪಕ್ಷವು ಬಿಜೆಪಿ ಮತ್ತು ಕಾಂಗ್ರೆಸ್ ಗಿಂತ ಭಿನ್ನವಾದ ಪಕ್ಷವಾಗಿದೆ. ಆ ಪಕ್ಷಗಳಂತೆ ನಮ್ಮ ಪಕ್ಷ ಚುನಾವಣಾ ಬಾಂಡ್ ಪಡೆದಿಲ್ಲ. ವೋಟು ಕೊಡಿ, ನೋಟು ಕೊಡಿ ಘೋಷವಾಕ್ಯದೊಂದಿಗೆ ಲೋಕಸಭಾ ಚುನಾವಣೆ ಎದುರಿಸುತ್ತಿದ್ದೇವೆ ಎಂದು ತಿಳಿಸಿದರು.
ಆಶಾ, ಅಂಗನವಾಡಿ, ಬಿಸಿಯೂಟ ಸೇರಿದಂತೆ ಎಲ್ಲಾ ವಲಯಗಳ ಕಾರ್ಮಿಕರ ಜೀವನ ನಿರ್ವಹಣೆಗೆ ಸೂಕ್ತ ವೇತನ ವ್ಯವಸ್ಥೆ ಮಾಡುವುದು. ಅಗತ್ಯ ಕಾನೂನು ಜಾರಿಗೊಳಿಸುವ ಮೂಲಕ ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನೀಡುವುದು. ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ನೀಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಶ್ರೀರಾಮನ್ , ಶೋಭಾ, ಕೆ.ವಿ.ಭಟ್ಟ ಇದ್ದರು.