ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧ ತೀರ್ಮಾನ ಕೈಗೊಂಡಿರುವ ಪಕ್ಷದ ಹೈಕಮಾಂಡ್ ನಡೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಡಿ.ವಿ.ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯ ಬಿಜೆಪಿ ನಾಯಕರನ್ನು ಹೊರಗಿಟ್ಟೇ ಪಕ್ಷದ ವರಿಷ್ಠರು ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯ ಬಿಜೆಪಿ ನಾಯಕತ್ವ ವಿಚಾರದಲ್ಲಿಯೂ ಹೈಕಮಾಂಡ್ ವಿಳಂಬ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ ಎಂದೂ ಅವರು ಬೇಸರ ಹೊರಹಾಕಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ಯಾವುದೇ ವಿಚಾರದಲ್ಲಿ ರಾಜ್ಯದ ನಾಯಕರ ಜತೆ ಚರ್ಚೆ ನಡೆಸಿಲ್ಲ. ನಮ್ಮನ್ನು ಹೊರಗಿಟ್ಟೇ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿದರು. ಪಕ್ಷದ ರಾಜ್ಯಾಧ್ಯಕ್ಷ ಮತ್ತು ಪ್ರತಿಪಕ್ಷ ನಾಯಕನ ವಿಚಾರದಲ್ಲಿ ಸೂಕ್ತ ತೀರ್ಮಾನವಾಗಬೇಕಿತ್ತು. ಯಾವ ಸಮಯದಲ್ಲಿ ಏನು ತೀರ್ಮಾನವಾಗಬೇಕಿತ್ತೋ ಅದು ಆಗದಿರುವುದು ನೋವಿನ ಸಂಗತಿ. ಇದು ಕಾರ್ಯಕರ್ತರ ಮೇಲೆ ಪರಿಣಾಮ ಬೀರಲಿದೆ. ಕಾರ್ಯಕರ್ತರು ಸಹ ಪಕ್ಷ ಯಾಕೆ ಹೀಗಾಯಿತು ಎಂಬ ನೋವಿನಲ್ಲಿದ್ದಾರೆ. ಈಗಾಲಾದರೂ ನಾಯಕತ್ವದ ಬಗ್ಗೆ ವರಿಷ್ಠರು ಬೇಗ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪಕ್ಷದ ವರಿಷ್ಠರು ತೀರ್ಮಾನ ಕೈಗೊಂಡಿಲ್ಲ ಎಂಬ ಕಾರಣಕ್ಕೆ ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಪಕ್ಷದ ಸಂಘಟನೆಯತ್ತ ಕೆಲಸ ಮಾಡುತ್ತೇವೆ. ಆದರೆ, ನಾಯಕತ್ವ ಆಯ್ಕೆಯಾದರೆ ಪಕ್ಷದ ಸಂಘಟನೆಯ ವೇಗ ಮತ್ತಷ್ಟು ಹೆಚ್ಚಾಗಲಿದೆ ಎಂದರು.