ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯ । ರಾಮನಗರದಲ್ಲಿ ಕಾಂಗ್ರೆಸ್ ಸಭೆ
ರಾಮನಗರ : ದಳದ ಅಭ್ಯರ್ಥಿಯನ್ನು ಬಿಜೆಪಿ ಚಿಹ್ನೆಯಲ್ಲಿ ನಿಲ್ಲಿಸಿದ್ದು, ಅದರ ಬಗ್ಗೆ ನಾನು ಈಗ ಚರ್ಚೆ ಮಾಡುವುದಿಲ್ಲ. ದಳ ಈಗ ಎಲ್ಲಿದೆ? ಕುಮಾರಣ್ಣ ಇದೇ ಜಿಲ್ಲೆಯಿಂದ 2 ಬಾರಿ ಮುಖ್ಯಮಂತ್ರಿಯಾಗಿ ಈಗ ಈ ಜಿಲ್ಲೆ ಬಿಟ್ಟು ಮಂಡ್ಯಕ್ಕೆ ಹೋಗುತ್ತಿದ್ದಾರೆ. ನೀವು ಅವರಿಗೆ ಟಾಟಾ ಗುಡ್ ಬೈ ಹೇಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ನೀವು ಯಾರಿಗೆ ಅಧಿಕಾರ ಕೊಟ್ಟಿದ್ದೀರಿ ಅವರು ನಿಮ್ಮನ್ನು ನಂಬದೇ ಪಕ್ಕದ ಕ್ಷೇತ್ರಕ್ಕೆ ಹೋಗಿದ್ದಾರೆ ಎಂದರು.
ಕೋವಿಡ್ ಸಮಯದಲ್ಲಿ ಜನರು ಕಷ್ಟಕ್ಕೆ ಸಿಲುಕಿದ್ದಾಗ ಅವರ ಪರವಾಗಿ ನಿಂತಿದ್ದು ಡಿ.ಕೆ. ಸುರೇಶ್. ಇದು ಮಾನವೀಯತೆ, ಹೃದಯವಂತಿಕೆಯಲ್ಲವೇ? ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿ ಹೋಗಿದ್ದರು? ಎಂದು ಪ್ರಶ್ನಿಸಿದರು.
ನನಗೆ ಕುಮಾರಸ್ವಾಮಿ ಅವರ ವಿಚಾರ ಮಾತನಾಡಲು ಇಷ್ಟವಿಲ್ಲ. ಆದರೂ ಅವರಿಗೆ ಒಂದು ವಿಚಾರ ಕೇಳಬಯಸುತ್ತೇನೆ. ನೀವು ಈ ಜಿಲ್ಲೆಯ ಕ್ಷೇತ್ರವೊಂದರ ಶಾಸಕರು. ಕೋವಿಡ್ ಬಂದಾಗ ಈ ಭಾಗದ ಬಡವರ ರಕ್ಷಣೆಗೆ ನೀವು ಯಾರಾದರೂ ಒಬ್ಬರು ಮುಂದೆ ಬಂದರಾ? ಇಲ್ಲ. ಆದರೆ, ಡಿ.ಕೆ ಸುರೇಶ್ ಅವರು ಪ್ರತಿ ಕುಟುಂಬಕ್ಕೆ ಆಹಾರ ಪದಾರ್ಥ, ಮೆಡಿಕಲ್ ಕಿಟ್ ವಿತರಿಸಿದರು ಎಂದರು.
ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ.ಸುರೇಶ್ ಪಿಪಿಇ ಕಿಟ್ ಧರಿಸಿ ಅನಾಥ ಶವಗಳ ಅಂತ್ಯ ಸಂಸ್ಕಾರ ಮಾಡಿದರು. ಇನ್ನು ಕೋವಿಡ್ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ಇದ್ದಾಗ, ಸುರೇಶ್ ಅವರು ತಾವೇ ಖುದ್ದಾಗಿ ಪಿಪಿಇ ಕಿಟ್ ಧರಿಸಿ ಕೋವಿಡ್ ವಾರ್ಡ್ ಒಳಗೆ ಹೋಗಿ, ಸೋಂಕಿತರ ಸಮಸ್ಯೆ ಆಲಿಸಿದರು. ಅವರಿಗೆ ಧೈರ್ಯ ತುಂಬಿದರು. ಇದು ಮಾನವೀಯತೆ ಅಲ್ಲವೇ? ಇದು ಹೃದಯವಂತಿಕೆಯಲ್ಲವೇ? ಕುಮಾರಣ್ಣ ಆಗ ಎಲ್ಲಿ ಹೋಗಿದ್ದರು? ಅವರ ಅಭ್ಯರ್ಥಿ ಎಲ್ಲಿ ಹೋಗಿದ್ದರು? ಅವರ ಕುಟುಂಬ ಎಲ್ಲಿ ಹೋಗಿತ್ತು? ಎಂದರು.
ಕಷ್ಟಕಾಲದಲ್ಲಿ ಜನರಿಗೆ ಸಹಾಯ ಮಾಡಲು ಕುಮಾರಸ್ವಾಮಿ ಅವರಿಂದ ಆಗಲಿಲ್ಲ. ರಾಮನಗರದಲ್ಲಿರುವ ಆಸ್ಪತ್ರೆ ಕಟ್ಟಿಸಿದವರು ಯಾರು? ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಈ ಡಿ.ಕೆ. ಶಿವಕುಮಾರ್ ಕಟ್ಟಿಸಿದ್ದು ಎಂದರು.
ಈ ಜಿಲ್ಲೆಯ ಬಡ ಜನರಿಗೆ ನಿವೇಶನ ನೀಡಬೇಕು ಎಂಬುದು ಡಿ.ಕೆ. ಸುರೇಶ್ ಅವರ ಕನಸು. ಈ ಬಗ್ಗೆ ಕುಮಾರಸ್ವಾಮಿ ಅವರಿಗೆ ನಾವು ಮನವಿ ಮಾಡಿದೆವು. ಆದರೂ ಅವರು ಒಂದು ಸಭೆಗೂ ಬರಲಿಲ್ಲ. ಆಶ್ರಯ ಸಮಿತಿ ಸಭೆಗೂ ಬರಲಿಲ್ಲ. ನಾವು ಚರ್ಚೆ ಮಾಡಿ 60 ಎಕರೆ ಜಾಗ ಮೀಸಲಿಡಲು ತೀರ್ಮಾನ ಮಾಡಿದೆವು. ಕಳೆದ ಬಾರಿ ಚುನಾವಣೆಯಲ್ಲಿ ನನ್ನ ಮನವಿಗೆ ಸ್ಪಂದಿಸಿ ನೀವು ಇಕ್ಬಾಲ್ ಅಹ್ಮದ್ ಅವರನ್ನು ಆರಿಸಿ ಕಳುಹಿಸಿದ್ದೀರಿ. ಈಗ ಡಿ.ಕೆ. ಸುರೇಶ್ ಹಾಗೂ ಇಕ್ಬಾಲ್ ಅವರು ಸೇರಿ ಬಡವರಿಗೆ ನಿವೇಶನ ನೀಡಲು 100 ಎಕರೆ ಜಾಗವನ್ನು ಮೀಸಲಿಡಲು ತೀರ್ಮಾನಿಸಿದ್ದಾರೆ. ಚನ್ನಪಟ್ಟಣ ಹಾಗೂ ರಾಮನಗರಕ್ಕೆ ಕುಡಿಯುವ ನೀರು ಪೂರೈಸಲು 540 ಕೋಟಿ ಯೋಜನೆ ರೂಪಿಸಲಾಗಿದೆ ಎಂದರು.
ದೇವೇಗೌಡರೇ, ಈ ಜನರು ದಡ್ಡರಲ್ಲ. ಈ ಜನ ನಿಮ್ಮನ್ನು, ಕುಮಾರಣ್ಣನವರನ್ನು ನೋಡಿದ್ದಾರೆ. ಇಂದು ನಮ್ಮ ಸರ್ಕಾರ ಅಧಿಕಾರದಲ್ಲಿದ್ದು, ನಾನು ನೀರಾವರಿ ಹಾಗೂ ಬೆಂಗಳೂರು ಇಲಾಖೆ ಜವಾಬ್ದಾರಿ ತೆಗೆದುಕೊಂಡಿರುವುದೇ ಈ ಯೋಜನೆ ಮಾಡಿ ಇತಿಹಾಸ ಸೃಷ್ಟಿಸಲು. ಈ ಯೋಜನೆಗೆ ಪೂರ್ವಭಾವಿ ಸಿದ್ಧತೆ ಮಾಡಿಕೊಂಡಿದ್ದೇವೆ. ಈ ಯೋಜನೆಯ ಅರಣ್ಯ ಪ್ರದೇಶಕ್ಕೆ ಪರ್ಯಾಯ ಭೂಮಿಯನ್ನು ಗುರುತಿಸಿ ಸರ್ವೇ ಮಾಡಲಾಗುತ್ತಿದೆ. ಈ ಯೋಜನೆ ಜಾರಿಯಾದರೆ ಕಾವೇರಿ ಜಲಾನಯನ ಪ್ರದೇಶದ ಎಲ್ಲಾ ಜನರಿಗೂ ಪ್ರಯೋಜನವಾಗಲಿದೆ ಎಂದರು.
ಕಳೆದ ಬಾರಿ ನಾವು ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕುಮಾರಸ್ವಾಮಿ ಅವರಿಗೆ ಬೇಷರತ್ತಾಗಿ ಬೆಂಬಲ ನೀಡಿ ಐದು ವರ್ಷಕ್ಕೆ ಮುಖ್ಯಮಂತ್ರಿ ಮಾಡಿದೆವು. ಕುಮಾರಣ್ಣ ಆ ಸರ್ಕಾರವನ್ನು ಉಳಿಸಿಕೊಳ್ಳಲಿಲ್ಲ. ಆ ಮೈತ್ರಿಗೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಪಕ್ಷದ ತೀರ್ಮಾನವನ್ನು ಒಪ್ಪಿ ನಾನು ಬೆಂಬಲವಾಗಿ ನಿಂತೆ. 1985ರಿಂದ ದೇವೇಗೌಡರ ಕುಟುಂಬದ ವಿರುದ್ಧ ರಾಜಕೀಯವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಆದರೂ ಪಕ್ಷದ ನಿರ್ದೇಶನಕ್ಕಾಗಿ ಕುಮಾರಸ್ವಾಮಿ ಅವರ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಬೆಂಬಲವಾಗಿ ನಿಂತೆ ಎಂದರು.
ಕೇಂದ್ರ ಸರ್ಕಾರ ನಮ್ಮ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿತು. ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಮಾಡಿದಾಗ ರಾಜ್ಯದ ಪರವಾಗಿ ಧ್ವನಿ ಎತ್ತಿದ್ದೇ ಡಿ.ಕೆ. ಸುರೇಶ್. ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮಾಡಿದರು. ರಾಜ್ಯದಲ್ಲಿ ಮೋದಿ ಅಲೆ ಇಲ್ಲ, ಗ್ಯಾರಂಟಿ ಅಲೆಯಿದೆ. ಕಾಂಗ್ರೆಸ್ ಅಲೆ, ಸುರೇಶ್ ಅಲೆ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಅವರ ಅಲೆ ಇದೆ ಎಂದರು.