ಸಾಹಿತಿ ಕಮಲ ಹಂಪನಾ ವಿಧಿವಶ
ಪ್ರತಿನಿಧಿ ವರದಿ ಬೇಲೂರು
ಕನ್ನಡ ಸಾಹಿತ್ಯ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ ಸಾಹಿತಿ ಕಮಲಾ ಹಂಪನಾ ನಿಧನ ನಿಜಕ್ಕೂ ಸಾಹಿತ್ಯ ಕ್ಷೇತ್ರಕ್ಕೆ ನಷ್ಟವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಬೇಲೂರು ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಸಂತಾಪ ವ್ಯಕ್ತಪಡಿಸಿದರು.
ಪತ್ರಿಕಾ ಹೇಳಿಕೆ ನೀಡಿದ ಅವರು, ಸಾಹಿತಿ ಹಾಗೂ ಸಂಶೋಧಕರಾಗಿರುವ ಹಂ.ಪ.ನಾಗರಾಜಯ್ಯ ಅವರ ಧರ್ಮ ಪತ್ನಿಯಾಗಿರುವ ಕಮಲ ಹಂಪನಾ ಅವರು ತಮ್ಮದೆಯಾದ ಸಾಹಿತ್ಯ ಕೃಷಿಯಿಂದ ನಾಡಿನಲ್ಲಿ ಛಾಪು ಮೂಡಿಸಿದ್ದಾರೆ. ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ ಎಂಬ ಶರಣ ವಾಣಿಯಂತೆ ಸಾಹಿತ್ಯ ಕ್ಷೇತ್ರದಲ್ಲಿ ಪತಿ-ಪತ್ನಿಯರು ಸಲ್ಲಿಸಿದ ಸಾಹಿತ್ಯ ಕೃಷಿ ನಿಜಕ್ಕೂ ಅವಿಸ್ಮರಣೀವಾಗಿದೆ.
ಕಮಲಾ ಹಂಪನಾ ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡಿದ್ದಾರೆ. ಮೂಡುಬಿದರೆಯಲ್ಲಿ ನಡೆದ 71ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಸಂದಿವೆ. ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆಯಾಗಿತ್ತು.
ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ. ನಾಟಕ, ಕತೆಗಳು ಮತ್ತು ವಚನಗಳಲ್ಲಿ ಸೃಷ್ಟಿಶಕ್ತಿಯ ವಿನ್ಯಾಸ ಕೆನೆಕಟ್ಟಿದೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಆಧುನಿಕ ವಚನಗಳಿರುವ ಸಂಕಲನಗಳು ಮತ್ತು ಜನಪರ ಮತ್ತು ವೈಚಾರಿಕ ಲೇಖಕಗಳ ಮೂಲಕ ನಾಡಿನ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ. ಅವರ ಬದುಕು ಮತ್ತು ಸಾಹಿತ್ಯತಿರುಳು ಜನಮನಕ್ಕೆ ತಿಳಿಸುವ ಕಾರ್ಯ ನಡೆಯಬೇಕಿದೆ ಎಂದು ತಿಳಿಸಿದರು.