ರಾಜ್ಯ ಸರ್ಕಾರವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆ ಮಾಡಿದ್ದು, ರಾಜ್ಯದಲ್ಲಿರುವ ಈಗಿನ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಿದೆ. ಜತೆಗೆ, ಮೇಕೆದಾಟು ಯೋಜನೆಗೆ ಅನುಮತಿ ನೀಡುವ ಮೂಲಕ ಎರಡೂ ರಾಜ್ಯಗಳ ನಡುವೆ ಪದೇ ಪದೇ ಉಂಟಾಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವುದು ಸೇರಿದಂತೆ ಎರಡು ಬೇಡಿಕೆಗಳನ್ನು ಮಂಡಿಸಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ರಾಜ್ಯದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ ಮಾಡಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಛ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು. ಶುಕ್ರವಾರ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾವೇರಿ ಬಗ್ಗೆ ಬಿಜೆಪಿ, ಜೆಡಿಎಸ್ ರಾಜಕೀಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ತಮ್ಮ ರಾಜೀನಾಮೆ ಕೇಳುತ್ತಿರುವ ಪ್ರತಿಪಕ್ಷಗಳು, ಸರ್ವಪಕ್ಷ ಸಭೆಯಲ್ಲಿ ಹೇಳದ ವಿಚಾರಗಳನ್ನು ಹೊರಗೆ ಹೇಳುತ್ತಿವೆ ಎಂದರು. ಕಾವೇರಿ ನದಿ ನೀರು ಹರಿಸುವ ವಿಚಾರ ಸಂಬಂಧ ನಡೆವ ಸಭೆಯಲ್ಲಿ ನಮ್ಮ ವಾದವನ್ನು ಇನ್ನಷ್ಟು ಬಲವಾಗಿ ಮಂಡಿಸಲಾಗುವುದು.
ನ್ಯಾಯಾಲಯದಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ಆದರೆ, ನಮ್ಮ ಅರ್ಜಿ ವಜಾ ಆಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನಿರ್ವಹಣಾ ಪ್ರಾಧಿಕಾರ ಎರಡರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೆವು. ಸುಪ್ರೀಂಕೋರ್ಟ್ ನಮ್ಮ ಹಾಗೂ ತಮಿಳುನಾಡಿನ ಅರ್ಜಿಯನ್ನು ತಿರಸ್ಕಾರ ಮಾಡಿದೆ. ತಮಿಳುನಾಡು 24 ಸಾವಿರ ಕ್ಯೂಸೆಕ್ಸ್ ನೀರು ಕೇಳಿದ್ದರು. ನಂತರ 7200 ಕ್ಯೂಸೆಕ್ಸ್ ಕೇಳಿದರು. ನಾವು ಐದು ಸಾವಿರ ಕ್ಯೂಸೆಕ್ಸ್ ನೀರು ಕೂಡ ಕೊಡಲಾಗುವುದಿಲ್ಲ. ನಮ್ಮ ಬಳಿ ನೀರಿಲ್ಲ ಎಂದು ವಾದಿಸಿದ್ದು, ಅದನ್ನು ನ್ಯಾಯಾಲಯ ಒಪ್ಪಿಲ್ಲ ಎಂದು ಹೇಳಿದರು.