ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂಬ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಮಧ್ಯೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾತನಾಡಿ, ಅವರ (ಸಿದ್ದರಾಮಯ್ಯ) ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಅನುಮಾನ ಬೇಡ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.
ನಮ್ಮ ಸರ್ಕಾರ ಬಲಿಷ್ಠವಾಗಿದೆ. ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ನಮ್ಮ ರಾಜ್ಯದ ಮುಖ್ಯಮಂತ್ರಿ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ನಾವಿಬ್ಬರು ಸೇರಿ ಒಟ್ಟಿಗೆ ಚುನಾವಣೆ ಮಾಡುತ್ತೇವೆ.ಆದ್ರೆ, ಅವರ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ, ಅದರಲ್ಲಿ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆ ಯಾರ ನೇತೃತ್ವದಲ್ಲಿ ನಡೆಯಲಿದೆ ಎನ್ನುವುದು ಬಹಿರಂಗವಾಗಿದೆ.
ಇನ್ನು ಇದೇ ವೇಳೆ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಯತೀಂದ್ರ ಹೇಳಿಕೆ ಪ್ರತಿಕ್ರಿಯಿಸಿದ ಡಿಕೆಶಿ, ಆಸೆ ಪಡುವುದು, ಹೇಳೋದು, ಜನರಿಗೆ ಮನವಿ ಮಾಡುವುದು ಸಾಮಾನ್ಯ. ನಾನು ನನ್ನೂರಿಗೆ ಹೋದಾಗ ನನಗೆ ಶಕ್ತಿ ಕೊಡಿ ಎಂದು ಕೇಳುತ್ತೇನೆ. ಅದು ಸ್ವಾಭಾವಿಕ, ಬೇರೆ ರೀತಿ ಯಾಕೆ ಟ್ವಿಸ್ಟ್ ಮಾಡಬೇಕು. ಯತೀಂದ್ರ ಸೂಕ್ಷ್ಮ ವ್ಯಕ್ತಿ, ಉದ್ಬವ ಆಗುತ್ತಿರುವ ನಾಯಕ. ನಾವು ಅವರಿಗೆ ಸಹಕಾರ ಕೊಡೋಣ. ಬಿಜೆಪಿಯವರು ಅವರ ಪಕ್ಷವನ್ನ ಸರಿ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.