ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹುದ್ದೆಯಿಂದ ಕೆಳಗೆ ಇಳಿಸಲು ಸಂಚು ಹೂಡುವ ಗ್ಯಾಂಗ್ ಕಾಂಗ್ರೆಸ್ ಪಕ್ಷದಲ್ಲೇ ಇದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ಚುನಾವಣಾ ಸಿದ್ದತಾ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ಕಾಂಗ್ರೆಸ್ ಪಕ್ಷದ ಸ್ಥಿತಿಯ ಬಗ್ಗೆ ಈಗಾಗಲೇ ಹೇಳಿದ್ದಾರೆ. ರಾಜ್ಯದಲ್ಲಿ ಸೂಪರ್ ಸಿಎಂ, ಶಾಡೋ ಸಿಎಂ ಬಹಳಷ್ಟು ಮಂದಿ ಇದ್ದಾರೆ. ಬಿಕೆ ಹರಿಪ್ರಸಾದ್ ಕೂಡ ಮಸಾಲತ್ತು ಮಾಡುತ್ತಿದ್ದಾರೆ. ಗುಬ್ಬಿ ಶಾಸಕ ಶ್ರೀನಿವಾಸ್ ನಿಜ ಹೇಳಿದ್ದಾರೆ ಎಂದು ಹೇಳಿದರು.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸ್ಥಿರ ಸರ್ಕಾರವನ್ನು ಜನ ಬಯಸಿದ್ದಾರೆ. ಅತಂತ್ರ ಕಿಚಡಿ ಸರ್ಕಾರ ಜನರಿಗೆ ಬೇಕಾಗಿಲ್ಲ. ಕರ್ನಾಟಕದಲ್ಲೂ ಕೆಲವು ಬಾರಿ ಕಿಚಡಿ ಸರ್ಕಾರ ಆಗಿತ್ತು. ಆವಾಗಲೆಲ್ಲ ಪಚಡಿ ಆಗಿಹೋಗಿತ್ತು. ಜನರಿಗೆ ಈಗ ಅದು ಬೇಕಾಗಿಲ್ಲ. ಜನ ಸುಭದ್ರ ಸರ್ಕಾರವನ್ನು ಬಯಸುತ್ತಿದ್ದಾರೆ ಎಂದು ಅಶೋಕ್ ಹೇಳಿದರು.
ಐದು ವರ್ಷ ಸುಭದ್ರ ಸರ್ಕಾರ ನೀಡುವ ಸಾಮರ್ಥ್ಯ ಇರುವುದು ರೇಂದ್ರ ಮೋದಿ ಅವರಿಗೆ ಮಾತ್ರ. ಇದನ್ನು ಕರ್ನಾಟಕದ ಜನ ಅರ್ಥ ಮಾಡಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ರಾಜ್ಯದ ಜನ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಆಯ್ಕೆ ಮಾಡುತ್ತಾರೆ ಎಂದು ಅಶೋಕ್ ಭರವಸೆ ವ್ಯಕ್ತಪಡಿಸಿದರು.