ಹನೂರು : ತಾ. ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಗೂ ಜಾನುವಾರುಗಳಿಗೆ ಮೇವಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ಉಪ ವಿಭಾಗಾಧಿಕಾರಿ ಶಿವಮೂರ್ತಿ ಹೇಳಿದರು.
ಪಟ್ಟಣದ ನಾಡಕಚೇರಿ ಹಾಗೂ ಪಶು ಇಲಾಖೆಯ ಕಚೇರಿಗಳಿಗೆ ಭೇಟಿ ನೀಡಿ ಕಡತ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ತಾಲೂಕಿನ ಯಾವುದೇ ಗ್ರಾಮದಲ್ಲಾಗಲಿ, ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಮೇವಿನ ಕೊರತೆ ನೀಗಿಸಿ : ಪಶು ವೈದ್ಯಾಧಿಕಾರಿ ಸಿದ್ದರಾಜು ಅವರ ಜತೆಗೆ ಸಭೆ ನಡೆಸಿದ ಉಪ ವಿಭಾಗಾಧಿಕಾರಿಗಳು ತಾಲೂಕಿನಲ್ಲಿ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ತೊಳಸಿಕೆರೆ ಗ್ರಾಮಕ್ಕೆ ಭೇಟಿ : ತೊಳಸಿಕೆರೆ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡಿರುವ ಹಿನ್ನಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಸೋಮವಾರ ಭೇಟಿ ನೀಡಿ ಅವರ ಸಮಸ್ಯೆ ಆಲಿಸಿ ಎಲ್ಲರೂ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರಣೆ ನೀಡಬೇಕು ಎಂದರು.
ಹಳೆಯ ಕಟ್ಟಡ ದುರಸ್ಥಿಗೆ ಕ್ರಮ : ತಹಶೀಲ್ದಾರ್ ಕಚೇರಿ ಬಳಿ ಇರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಗ್ರಂಥಾಲಯದ ಕಟ್ಟಡ ಹಳೆಯದಾಗಿದ್ದು ಇದನ್ನು ಕೆಡವಿ ನೂತನವಾಗಿ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಸಂದರ್ಭದಲ್ಲಿ ಹನೂರು ತಹಶೀಲ್ದಾರ್ ಗುರುಪ್ರಸಾದ್, ಪಶು ವೈದ್ಯಾಧಿಕಾರಿ ಡಾ ಸಿದ್ದರಾಜು, ತಾ.ಪಂ ಇಒ ಉಮೇಶ್, ತಹಶೀಲ್ದಾರ್ ರಂಜಿತ್, ಇನ್ನಿತರರು ಇದ್ದರು.