– ಲೋಕಸಭಾ ಚುನಾವಣಾ ಕರ್ತವ್ಯ ನಿರ್ವಹಣೆಗೆ ನಿರ್ಲಕ್ಷ್ಯ
– ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ
ಪ್ರತಿನಿಧಿ ವರದಿ ಮೈಸೂರು:
ಲೋಕಸಭಾ ಚುನಾವಣಾ ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ನೋಡಲ್ ಅಧಿಕಾರಿಯನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಮೈಸೂರು ಪಾಲಿಕೆಯ ಎಇಇ ರಾಜೀವ್ ನಾಥ್ ಅಮಾನತುಗೊಂಡವರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜೀವ್ನಾಥ್ ಅವರನ್ನು ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸ್ಟ್ರಾಂಗ್ ರೂಮ್ ಮತ್ತು ಮ್ಯಾನ್ ಪವರ್ ನೋಡಲ್ ಅಧಿಕಾರಿಯಾಗಿ ನಿಯೋಜಿಸಲಾಗಿತ್ತು. ಆದರೆ ತಮಗೆ ನಿರ್ವಹಿಸಿದ್ದ ಚುನಾವಣಾ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ನಿರ್ಲಕ್ಷ್ಯತೆ ತೋರಿದ ರಾಜೀವ್ ನಾಥ್, ವಿದ್ಯುನ್ಮಾನ ಮತಯಂತ್ರಗಳ ವಾಹನವನ್ನು ಜೆಎಸ್ಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ಇರಿಸುವ ಕೆಲಸದಲ್ಲಿ ಲೋಪವೆಸಗಿದ್ದು, ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ವ್ಯವಹರಿಸಿ ಮುಖ್ಯದ್ವಾರ ತೆರೆಸುವ ವ್ಯವಸ್ಥೆ ಸಹ ಮಾಡಿಲ್ಲ ಎನ್ನಲಾಗಿದೆ.
ಅಧಿಕಾರಿ ರಾಜೀವ್ ನಾಥ್ ಅವರ ನಿರ್ಲಕ್ಷ್ಯತೆಯಿಂದಾಗಿ ವಿದ್ಯುನ್ಮಾನ ಮತಯಂತ್ರಗಳಿದ್ದ ವಾಹನ ಅರ್ಧಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲೇ ನಿಂತಿದೆ. ಅಲ್ಲದೆ ವಿದ್ಯುನ್ಮಾನ ಮತಯಂತ್ರಗಳನ್ನು ಸ್ಟ್ರಾಂಗ್ ರೂಮ್ನಲ್ಲಿಡಲು ಮುನ್ನೆಚ್ಚರಿಕೆ ಕ್ರಮಕೈಗೊಂಡಿರಲಿಲ್ಲ. ಇದರ ಜೊತೆಗೆ ಸಮಯಕ್ಕೆ ಸರಿಯಾಗಿ ಸ್ಟ್ರಾಂಗ್ ರೂಮ್ನ ಮರದ ಬಾಗಿಲು ತೆಗೆಯಲು ಕಾರ್ಪೆಂಟರ್ ಕರೆಸುವಲ್ಲೂ ವ್ಯವಸ್ಥೆ ಮಾಡಿರಲಿಲ್ಲ ಹಾಗೂ ವಿದ್ಯುನ್ಮಾನ ಮತಯಂತ್ರಗಳನ್ನು ಸಾಗಿಸುವ ಸಂದರ್ಭದಲ್ಲಿ ಖುದ್ದಾಗಿ ಹಾಜರಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಎಲ್ಲ ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಪಾಲಿಕೆಯ ಎಇಇ ರಾಜೀವ್ ನಾಥ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.
===================