ಜಿಲ್ಲಾ ಪರಿಶಿಷ್ಟ ಜಾತಿ ಹಿತರಕ್ಷಣಾ ಸಮಿತಿ ಸಭೆ
ಪ್ರತಿನಿಧಿ ವರದಿ ಚಾಮರಾಜನಗರ
ಪರಿಶಿಷ್ಟ ಜಾತಿ ಜನಾಂಗದ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ಸಂಬಂಧ ನಗರದಲ್ಲಿ ಶುಕ್ರವಾರ ಜಿಲ್ಲಾ ಪರಿಶಿಷ್ಟ ಜಾತಿ ಹಿತರಕ್ಷಣಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿ.ಪಿ. ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಮೊದಲಿಗೆ ಜಿಲ್ಲೆಯ ಪರಿಶಿಷ್ಟ ಸಮುದಾಯದ ಮುಖಂಡರಿಂದ ಸಮಸ್ಯೆ, ಕುಂದುಕೊರತೆಗಳನ್ನು ಜಿಲ್ಲಾಧಿಕಾರಿಯವರು ಆಲಿಸಿದರು.
ಜಿಲ್ಲೆಯ ಹಲವು ಭಾಗಗಳಲ್ಲಿ ಜೀತಪದ್ದತಿಯಿಂದ ವಿಮುಕ್ತರಾದವರಿಗೆ ಪುನರ್ವಸತಿ ಕಲ್ಪಿಸಿರುವುದಿಲ್ಲ. ಜೀತಮುಕ್ತರಾದವರಿಗೆ ಗುರುತಿನ ಚೀಟಿ ಇಲ್ಲದಿರುವುದರಿಂದ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇವರಿಗೆ ಮೀಸಲಾಗಿದ್ದ ಜಮೀನಿನ ಸಾಗುವಳಿಗೆ ಹಕ್ಕುಪತ್ರ ನೀಡಿದ್ದರೂ ಸದರಿ ಜಮೀನಿನಲ್ಲಿ ಬೇರೆಯವರು ಕೃಷಿ ಮಾಡುತ್ತಿದ್ದಾರೆ. ಸರ್ಕಾರಿ ಜಾಗ ಇರುವೆಡೆ ಸೂಕ್ತ ಜಮೀನು ಕೊಟ್ಟು ಜೀತಮುಕ್ತರಿಗೆ ಹಾಗೂ ಪುನರ್ವಸತಿ ಕಲ್ಪಿಸಬೇಕು ಎಂದು ಸಮುದಾಯದ ಮುಖಂಡರು ಸಭೆಯಲ್ಲಿ ತಿಳಿಸಿದರು.
ಈ ಸಂಬಂಧ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಶಿಲ್ಪಾನಾಗ್, ಮುಂಬರುವ ಸೆಪ್ಟೆಂಬರ್ ತಿಂಗಳಲ್ಲಿ ಜಿಲ್ಲೆಯಾದ್ಯಂತ ಜೀತಮುಕ್ತ ಜಿಲ್ಲೆ ಅಭಿಯಾನ ಹಮ್ಮಿಕೊಳ್ಳಲಾಗುವುದು. ಅಭಿಯಾನ ಅಂಗವಾಗಿ ಜಿಲ್ಲೆಯ ಪ್ರತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಿಶೇಷ ಗ್ರಾಮಸಭೆ ಏರ್ಪಡಿಸಿ ಜೀತಮುಕ್ತರಿಗೆ ಪುನರ್ವಸತಿ ಕಲ್ಪಿಸಲು ಗ್ರಾಮಪಂಚಾಯತ್ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದರು.
ಜಿ.ಪಂ ಸಿಇಒ ಮೋನಾ ರೋತ್, ಎಡಿಸಿ ಗೀತಾ ಹುಡೇದ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಬಿಂದ್ಯಾಶ್ರೀ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಮುಖಂಡರಾದ ಸಿ.ಕೆ. ಮಂಜುನಾಥ್, ಸಿ.ಎಂ. ಕೃಷ್ಣಮೂರ್ತಿ, ಕೆ.ಎಂ. ನಾಗರಾಜು, ಅರಕಲವಾಡಿ ನಾಗೇಂದ್ರ, ಸಂಘಸೇನಾ, ಚಾ.ಗು. ನಾಗರಾಜು, ಮುತ್ತಿಗೆ ಮೂರ್ತಿ, ಪರ್ವತ್ರಾಜ್, ಸಿ.ಕೆ. ರವಿಕುಮಾರ್, ದಡದಹಳ್ಳಿ ಶಂಕರ, ಬಸವನಪುರ ರಾಜಶೇಖರ್, ಯರಿಯೂರು ರಾಜಣ್ಣ, ಸಿ.ಎಂ. ಕೃಷ್ಣ, ಪ್ರಸನ್ನ, ಅಂಬರೀಷ್, ಸುರೇಶ್ ನಾಯುಕ, ಶ್ರೀಕಂಠ, ದೊಡ್ಡಿಂದುವಾಡಿ ಸಿದ್ದರಾಜು, ನಾಗರಾಜು, ಶಿವಣ್ಣ, ನಾಗೇಶ್, ಮಹೇಶ್, ವಾಸು, ಬ್ಯಾಡಮೂಡ್ಲು ಬಸವಣ್ಣ ಸೇರಿದಂತೆ ಇತರರು ಇದ್ದರು.
23ಸಿಎಚ್ಎನ್.4:ಪರಿಶಿಷ್ಟ ಜಾತಿ ಜನಾಂಗದ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ಸಂಬಂಧ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ. ಸಭಾಂಗಣದಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ ಹಿತರಕ್ಷಣಾ ಸಮಿತಿ ಸಭೆ ನಡೆಯಿತು.
——————-
ಕೋಟ್
ಜಿಲ್ಲೆಯ ಯಾವುದೇ ಭಾಗದಲ್ಲಿ ಸಾಮಾಜಿಕ ಬಹಿಷ್ಕಾರ, ಅಸ್ಪೃಶ್ಯತೆ ಆಚರಣೆಯನ್ನು ಸಹಿಸುವುದಿಲ್ಲ. ಇದು ಸೂಕ್ಷ್ಮ ವಿಚಾರವಾಗಿದೆ. ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಹಾಗೂ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಿದೆ.
ಶಿಲ್ಪಾನಾಗ್, ಜಿಲ್ಲಾಧಿಕಾರಿ