ತುಮಕೂರು: ಪಾವಗಡದ ಪ್ರಥಮದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಮುಖಂಡ ಸುಜಿತ್ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮೂಲಕ ಹೇಳಿಕೆ ನೀಡಿದ್ದಾರೆ. ಪ್ರಥಮ ದರ್ಜೆ ಗುತ್ತಿಗೆದಾರ ಸುಜಿತ್ ಅವರು ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಎಸ್ಸಿಪಿ ಅಡಿ ರಸ್ತೆ ಹಾಗೂ ಚೆಕ್ ಡ್ಯಾಮ್ಗಳನ್ನು ನಿರ್ಮಾಣ ಮಾಡಿಸಿದ್ದಾರೆ.
ಆದರೆ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಪ್ಪ ಕಾಮಗಾರಿ ಸರಿಯಾಗಿ ಆಗಿಲ್ಲ ಎಂದು ಕುದ್ದು ತಾವೇ ತನಿಖೆ ನಡೆಸಿದ್ದರು. ಆದರೆ ತನಿಖೆಯಲ್ಲಿ ಕಾಮಗಾರಿ ಸರಿಯಾಗಿ ಆಗಿದೆ ಎಂದು ಸಾಬೀತಾಗಿದೆ. ಆದರೂ ಕೂಡ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಪ್ಪ ಅವರು ಪ್ರಥಮದರ್ಜೆ ಗುತ್ತಿಗೆದಾರ ಸುಜಿತ್ ಅವರ 45 ಲಕ್ಷ ರೂ. ಬಾಕಿ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ರಾಜಕೀಯ ದುರುದ್ದೇಶದಿಂದ ಹಣ ಬಿಡುಗಡೆ ಮಾಡಿಲ್ಲ. ನಾನು ಎಸ್ಸಿ ಆದ ಕಾರಣ ನನ್ನನ್ನು ತುಳಿಯುತ್ತಿದ್ದಾರೆ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಪ್ಪ ಅವರೇ ಕಾರಣ. ಸಣ್ಣಚಿತ್ತಪ್ಪ ಅವರಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಪ್ರಥಮದರ್ಜೆ ಗುತ್ತಿಗೆದಾರ ಸುಜೀತ್ ಹೇಳಿದ್ದಾರೆ.
ಕಳೆದ ತಿಂಗಳು ಮೇ 31 ರಂದು ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರಿನ ಗುತ್ತಿಗೆದಾರ ಪಿಎಸ್ ಗೌಡರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ದಿಂದ 2023-24ನೇ ಸಾಲಿನ ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದು ಪಿಎಸ್ ಗೌಡರ್ ನೇಣಿಗೆ ಶರಣಾಗಿದ್ದರು.
ರಾಜ್ಯದಲ್ಲಿ ಸದ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹರಗಣ ಸಾಕಷ್ಟು ಸದ್ದು ಮಾಡಿದೆ. ನಿಗಮದಲ್ಲಿ 85 ಕೋಟಿ ರೂ. ಹಗರಣ ನಡೆದಿದೆ ಎಂದು ಶಿವಮೊಗ್ಗದಲ್ಲಿ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಗರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ಸರ್ಕಾರಕ್ಕೆ ತಲೆನೋವು ಶುರುವಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರ ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದು, ಇದರಲ್ಲಿ ಮೌಖಿಕ ಹೇಳಿಕೆ ಮೇರೆ ಹಣ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂದು ನಮೂದಿಸಿದ್ದರು. ಇದು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರ ಅವರ ಟೆನ್ಷನ್ಗೆ ಕಾರಣವಾಗಿದೆ.