ಬಿಜೆಪಿ ಮಂಡ್ಯ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ವಿಶ್ವಾಸ
ಪಾಂಡವಪುರ : ಲೋಕಸಭೆ ಚುನಾವಣೆ ಮಂಡ್ಯ ಕ್ಷೇತ್ರದ ಎನ್.ಡಿ.ಎ ಮೈತ್ರಿ ಅಭ್ಯರ್ಥಿಯನ್ನು ಬಿಜೆಪಿ ಕಾರ್ಯಕರ್ತರು ಸೈನಿಕರಂತೆ ಹೋರಾಡಿ ಭರ್ಜರಿಯಾಗಿ ಗೆಲ್ಲಿಸುವ ಮೂಲಕ ಮತ್ತೊಮ್ಮೆ ಮೋದಿ ಪ್ರಧಾನಮಂತ್ರಿ ಆಗೋದು ಖಚಿತ ಎಂದು ಬಿಜೆಪಿ ಮಂಡ್ಯ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಹೊರವಲಯದಲ್ಲಿರುವ ಸಪ್ತಪದಿ ಕನ್ ವೆನ್ಷನ್ ಹಾಲ್ ನಲ್ಲಿ ಮೇಲುಕೋಟೆ ಕ್ಷೇತ್ರದ ಬಿಜೆಪಿ ವತಿಯಿಂದ ಆಯೋಜಿಸಿದ್ದ ನೂತನ ಜಿಲ್ಲಾಧ್ಯಕ್ಷರಿಗೆ ತವರಿನ ಸನ್ಮಾನ ಸಮಾರಂಭದಲ್ಲಿ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ರವರು ಪಕ್ಷದ ಕಾರ್ಯಕರ್ತರಿಂದ ತವರಿನ ಅಭಿನಂದನೆ ಸ್ವೀಕರಿಸಿ, ನಂತರ ಮಾತನಾಡಿದರು.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಧರ್ಮ ಕಡ್ಡಾಯವಾಗಿ ಪಾಲಿಸಿ, ಮಂಡ್ಯ ಜಿಲ್ಲೆ ಎನ್.ಡಿ.ಎ ಮೈತ್ರಿ ಅಭ್ಯರ್ಥಿ ಯಾರೇ ಆಗಲಿ, ಅತ್ಯಧಿಕ ಮತಗಳಿಂದ ಗೆಲ್ಲಿಸಲು ಬಿಜೆಪಿ ಕಾರ್ಯಕರ್ತರು ಸಿದ್ದರಾಗಿರಿ.
ಈ ಹಿಂದೆ ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಪಕ್ಷ ಮಂಡ್ಯ ಜಿಲ್ಲೆಯಲ್ಲಿ ಅವರ ಮೈತ್ರಿ ಧರ್ಮ ಪಾಲಿಸದೇ, ಜೆಡಿಎಸ್ ಅಭ್ಯರ್ಥಿಗೆ ನಂಬಿಸಿ, ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿಬಿಟ್ಟರು. ಆದರೆ ಬಿಜೆಪಿ ಕಾರ್ಯಕರ್ತರು ಹೇಗೆ ಮೈತ್ರಿ ಧರ್ಮ ಪಾಲಿಸುತ್ತೇವೆ ಎಂದು ಕಾಂಗ್ರೆಸ್ ಪಕ್ಷಕ್ಕೆ ತೋರಿಸುತ್ತೇವೆ ಎಂದು ಟೀಕಿಸಿದರು.
ರೈತ ವಿರೋಧಿ ಕಾಂಗ್ರೆಸ್ ಸರ್ಕಾರದಿಂದ ಸುಳ್ಳು ಹೇಳಿ, ಪದೇ ಪದೇ ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದಾರೆ. ಕೇಂದ್ರ ಸರ್ಕಾರದಿಂದ ರೈತರಿಗೆ ನೀಡುತ್ತಿದ್ದ ಕೃಷಿ ಸಮ್ಮಾನ್ ಹಣವನ್ನು ಕಸಿದುಕೊಂಡಿದೆ.
ಮೋದಿ ಅಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಯ ಉಂಟಾಗಿದೆ. ಬಹುಶಃ ಲೋಕಸಭೆ ಚುನಾವಣೆ ಮುಗಿದ ನಂತರ ಬಿಜೆಪಿ ಅಲೆಗೆ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾದರೂ ಆಶ್ಚರ್ಯ ಪಡಬೇಕಾಗಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಧೂಳೀಪಟ ಆಗಲಿದೆ ಎಂದು ಭವಿಷ್ಯ ನುಡಿದರು.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಎನ್.ಡಿ.ಎ ಅಭ್ಯರ್ಥಿ ಗೆಲ್ಲಿಸಲು ಬಿಜೆಪಿ ಕಾರ್ಯಕರ್ತರು ಪ್ರಾಮಾಣಿಕವಾಗಿ ಮೈತ್ರಿ ಧರ್ಮ ಪಾಲಿಸಿ, ಯಾವುದೇ ಚ್ಯುತಿ ಬರದಂತೆ ಸಂಘಟನೆ ಮಾಡೋಣ, ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ, ಕಾಂಗ್ರೆಸ್ ಪಕ್ಷಕ್ಕೆ ಬುದ್ದಿ ಕಲಿಸೋಣ ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಡಾ.ಇಂದ್ರೇಶ್ ಅವರು, ಬಿಜೆಪಿ ಕಾರ್ಯಕರ್ತರಿಂದ ಅದ್ದೂರಿಯಾಗಿ ತವರಿನ ಸನ್ಮಾನ ಸ್ವೀಕರಿಸಿದರು.
ಬಿಜೆಪಿ ಮುಖಂಡ ಹಾಗೂ ರೈತಸಂಘದ ಹೋರಾಟಗಾರ ಕೆ.ಎಸ್.ನಂಜುಂಡೇಗೌಡ, ಮಂಡ್ಯ ಜಿಲ್ಲಾ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಮಂಗಳ ನವೀನ್, ಪಾಂಡವಪುರ ಬಿಜೆಪಿ ಅಧ್ಯಕ್ಷ ನೀಲನಹಳ್ಳಿ ಧನಂಜಯ, ಮಾಜಿ ಅಧ್ಯಕ್ಷ ಎಲ್.ಅಶೋಕ್, ಜಿಲ್ಲಾ ಕಾರ್ಯದರ್ಶಿ ಕೆ.ಎಲ್.ಆನಂದ್, ಮೈಷುಗರ್ ಮಾಜಿ ಅಧ್ಯಕ್ಷ ಶಿವಲಿಂಗೇಗೌಡ, ವೀರಶೈವ ಲಿಂಗಾಯತ ಮಹಾಸಭಾ ಪಾಂಡವಪುರ ತಾಲೂಕು ಅಧ್ಯಕ್ಷ ನಿರಂಜನ್ ಬಾಬು ಸೇರಿದಂತೆ ಪಕ್ಷದ ಮುಖಂಡರಿದ್ದರು.