– ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಆರೋಪ
– ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ
ಪ್ರತಿನಿಧಿ ವರದಿ ಮೈಸೂರು
ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಇಲಾಖೆಗಳಲ್ಲಿ ಪೈಪೋಟಿಯಲ್ಲಿ ಹಗರಣ ನಡೆಯುತ್ತಿದ್ದು, ಈ ಬಗ್ಗೆ ಪಾದಯಾತ್ರೆ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ವಾಗ್ದಾಳಿ ನಡೆಸಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಶನಿವಾರ ಸಂಜೆ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮ ಹಾಗೂ ಮುಡಾದಲ್ಲಿ ಅವ್ಯವಹಾರ ನಡೆದಿದ್ದು, ವಾಲ್ಮೀಕಿ ನಿಗಮದ ಹಗರಣದ ಕುರಿತಂತೆ ಸದನದಲ್ಲಿ ಚರ್ಚೆ ನಡೆಯಿತು. 87 ಕೋಟಿ ಹಗರಣ ಆಗಿರುವ ಬಗ್ಗೆ ಸಿಎಂ ಒಪ್ಪಿಕೊಂಡಿದ್ದು, ವಾಲ್ಮೀಕಿ ಹಗರಣವನ್ನು ಚುನಾವಣೆಗೆ ಉಪಯೋಗಿಸಿಕೊಂಡಿದ್ದಾರೆ. ಈ ಹಗರಣದಲ್ಲಿ ಲೂಟಿ ಮಾಡಿರುವ ರಾಜ್ಯದ ಬೊಕ್ಕಸವನ್ನು ಲೋಕಸಭಾ ಚುನಾವಣೆಗೆ ಬೇರೆ ಬೇರೆ ರಾಜ್ಯಗಳಿಗೆ ಬಳಸಿಕೊಂಡಿದ್ದಾರೆ ಎಂದ ಅವರು, ಮುಡಾ ಹಗರಣದಲ್ಲಿ ಸಿಎಂ ಕುಟುಂಬದವರು ಭಾಗಿಯಾಗಿದ್ದು, ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ. ಹಗರಣದಲ್ಲಿ ಭಾಗಿಯಾದವರಿಗೆ ಕಾನೂನು ಮೂಲಕ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದರು.
ಜೆಡಿಎಸ್ ಸೋಲಿಸಲಾಗದು:
ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯವಿದ್ದು, ಮಂಡ್ಯದ ಜನರು ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದ ಕಾರಣ ಇಂಡಿಯಾದಲ್ಲಿ ಒಳ್ಳೆಯ ಹೆಸರು ಸಿಕ್ಕಿದೆ. ದೇಶಕ್ಕೆ ಗೌರವ ತರುವ ನಿಟ್ಟಿನಲ್ಲಿ ಎಚ್.ಡಿ.ಕುಮಾರಸ್ವಾಮಿ ಕೆಲಸ ಮಾಡುತ್ತಿದ್ದಾರೆ. ಅದರಂತೆ ನಿಖಿಲ್ ಕುಮಾರಸ್ವಾಮಿ ಅವರು 24 ಗಂಟೆ ಕೆಲಸ ಮಾಡುವ ಮೂಲಕ ಕುಮಾರಸ್ವಾಮಿ ನಂತರದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಬೇಕಿದ್ದು, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 11 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜೆಡಿಎಸ್ ಸಹಾಯದಿಂದ ಗೆದಿದ್ದಾರೆ. ಹೀಗಾಗಿ ಜೆಡಿಎಸ್ ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ರಾಜ್ಯ ಪ್ರವಾಸ ಮಾಡುತ್ತೇನೆ:
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಈಗ ತೆಗೆದುಕೊಂಡ ನಿರ್ಧಾರವನ್ನು ವಿಧಾನಸಭಾ ಚುನಾವಣೆಯಲ್ಲಿ ತೆಗೆದುಕೊಂಡಿದ್ದರೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಧಿಕಾರದಲ್ಲಿ ಇರುತ್ತಿತ್ತು. ಸದ್ಯ ಜೆಡಿಎಸ್ಗೆ ಹೊಸ ಹುರುಪು ಬಂದಿದ್ದು, ಇದಕ್ಕೆ ಮಂಡ್ಯ ಜನರ ಆಶಿರ್ವಾದವೇ ಕಾರಣವಾಗಿದೆ. ಪಕ್ಷದಲ್ಲಿ ಯುವಕರಿಗೆ ಅವಕಾಶ ಕೊಡಬೇಕೆಂಬ ಆಶಯದಲ್ಲಿ ನನಗೆ ಟಿಕೆಟ್ ನೀಡಲಾಗಿತ್ತು. ಆದರೆ ಕೆಲವು ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದು, ಈ ಕುರಿತಾಗಿ ನಾನು ಮಾತನಾಡುವುದಿಲ್ಲ. ಸದ್ಯ ಹಿರಿಯ ನಾಯಕರ ಸಲಹೆ, ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾಧ್ಯಂತ ಪ್ರವಾಸ ಮಾಡುತ್ತಿದ್ದು, ಆಷಾಢದ ಬಳಿಕ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಹೇಳಿದರು.
ಕುಮಾರಣ್ಣರ ಅನುಪಸ್ಥಿತಿ ಇದೆ:
ವಿಧಾನಸೌಧದಲ್ಲಿ ಕುಮಾರಸ್ವಾಮಿ ಅವರ ಅನುಪಸ್ಥಿತಿ ಕಾಡುತ್ತಿದೆ. 18 ಜನ ಶಾಸಕರಿದ್ದರೂ ಎಲ್ಲರು ಧ್ವನಿ ಎತ್ತಿದರೆ ನನ್ನು ಅನುಪಸ್ಥಿತಿ ಸರಿದೂಗಿಸಬಹುದು. ಗ್ಯಾರಂಟಿ ಯೋಜನೆಗಾಗಿ ದಲಿತರಿಗೆ ಮೀಸಲಾದ ಹಣವನ್ನು ಉಪಯೋಗಿಸಿಕೊಂಡಿರುವ ಸರ್ಕಾರ, ಡೆಂಘಿ ನಿಯಂತ್ರಿಸಲು ವಿಫಲವಾಗಿದೆ. ಬಿಜೆಪಿ ಸರ್ಕಾರ 40% ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಯಾವ ಶಾಸಕರಿಗೂ ಅನುದಾನ ಕೊಡುತ್ತಿಲ್ಲ. ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡಬೇಕೆಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದು, ಶೀಘ್ರದಲ್ಲಿ ದಿನಾಂಕ ನಿಗದಿ ಮಾಡುತ್ತೇನೆ ಎಂದರು.
ಇಲ್ಲದ ಆರೋಪ ಸರಿಯಲ್ಲ:
ಶಾಸಕ ಜಿ.ಡಿ. ಹರೀಶ್ ಗೌಡ ಮಾತನಾಡಿ, ಮುಡಾ ಹಗರಣದಲ್ಲಿ ರಾಜ್ಯ ಸರ್ಕಾರ ತನಿಖೆ ಮಾಡಿ, ಕ್ರಮಕೈಗೊಳ್ಳದೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತದಲ್ಲಿ ಕೈಗೊಂಡಿರುವ ಪಾದಯಾತ್ರೆಗೆ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿ, ಸರ್ಕಾರದ ಹೊಣೆಗಾರಿಕೆಯನ್ನು ಎತ್ತಿಹಿಡಿಯಲು ಸಹಕಾರ ನೀಡಬೇಕೆಂದು ಮನವಿ ಮಾಡಿದ ಅವರು, ಮುಡಾ ಹಗರಣದಲ್ಲಿ ಪ್ರಾಥಮಿಕ ಹಂತದಿಂದ ಆಗಿರುವ ಲೋಪದೋಷಗಳನ್ನು ವಿವರಿಸಿದರು.
ಸಭೆಯಲ್ಲಿ ಮಾಜಿ ಶಾಸಕರಾದ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ಅನ್ನದಾನಿ, ಕೆ. ಮಹದೇವ್, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ವಿವೇಕಾನಂದ ಇತರರಿದ್ದರು.
=================
ಕೋಟ್
ರಾಜ್ಯ ಸರ್ಕಾರ ದುರ್ಬಲವಾಗಿದ್ದು, ಮುಡಾ ಹಗರಣವನ್ನು ಮುಚ್ಚಲು ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಸದನದಲ್ಲಿ ಕುಮಾರಸ್ವಾಮಿ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದು, ಸದನದಲ್ಲಿ ಕುಮಾರಸ್ವಾಮಿ ಇದಿದ್ದರೆ ಹಗರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಡುತ್ತಿದ್ದರು.
ಸುರೇಶ್ ಬಾಬು,
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ.
===============
ಫೋಟೋ ಶೀರ್ಷಿಕೆ:
ನಗರದ ಖಾಸಗಿ ಹೋಟೆಲ್ನಲ್ಲಿ ಶನಿವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು.