ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಶೀಘ್ರದಲ್ಲೇ ದೆಹಲಿಗೆ ರಾಜ್ಯ ಕಾಂಗ್ರೆಸ್ ಶಾಸಕರ ಪೆರೇಡ್ ಹೊರಡಿಲಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಇಂದು ಮೈಸೂರಿನಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಇವರು, ಈ ಬಗ್ಗೆ ಪಕ್ಷ ನೀಡುವ ಸೂಚನೆಯಂತೆ ಮುಂದುವರೆಯುತ್ತೇವೆ ಪಕ್ಷ ಹೇಳಿದಾಗ ದೆಹಲಿಗೆ ತೆರಳುತ್ತೇವೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದೇವೆ. ಸಿದ್ದರಾಮಯ್ಯನವರ ನಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯ ಮಾಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ, ಸಿಎಂ ಆಗಿ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ. ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೇರಿದಂತೆ ಎಲ್ಲಾ ಹಿರಿಯ ನಾಯಕರ ಬೆಂಬಲವಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಕಬಿನಿ ಜಲಾಶಯದ ಅಣೆಕಟ್ಟೆಯಲ್ಲಿ ಬಿರುಕು ಉಂಟಾಗಿದೆ ಎನ್ನುವ ವಿಚಾರವಾಗಿ ಮಾತನಾಡಿದ ಅವರು, ಶೀಘ್ರದಲ್ಲೇ ಅಣೆಕಟ್ಟು ದುರಸ್ತಿ ಕಾರ್ಯ ನಡೆಯಲಿದೆ ಸುಮಾರು 6 ಕೋಟಿ ವೆಚ್ಚದಲ್ಲಿ ಕಬಿನಿ ಜಲಾಶಯದ ಅಣೆಕಟ್ಟು ದುರಸ್ತಿ ಕಾರ್ಯ ಮಾಡಲಾಗುತ್ತದೆ.ಈ ಬಗ್ಗೆ ಜಲ ಸಂಪನ್ಮೂಲ ಸಚಿವರು ಭರವಸೆ ನೀಡಿದ್ದಾರೆ. ಕೆ ಆರ್ ಎಸ್ ಜಲಾಶಯದ ಮಾದರಿಯಲ್ಲೇ ಕಬಿನಿ ಜಲಾಶಯ ಬಳಿ ಉದ್ಯಾನವನ ನಿರ್ಮಿಸಲಾಗುವುದು.ಇದಕ್ಕೆ 30 ಕೋಟಿ ರೂಪಾಯಿ ಅಂದಾಜು ಪಟ್ಟಿ ಸಿದ್ದಪಡಿಸಲಾಗಿದೆ ಶೀಘ್ರದಲ್ಲೇ ಕಾರ್ಯರಂಭ ಮಾಡಲು ಕ್ರಮ ಕೈಗೊಳ್ಳುತ್ತೇವೆ. ಹೆಚ್ ಡಿ ಕೋಟೆ ತಾಲ್ಲೂಕು ಪ್ರವಾಸೋದ್ಯಮಕ್ಕೆ ಪೂರಕವಾಗಿದ್ದು, ತಾಲೂಕಿನಲ್ಲಿ ಮೂರು ಜಲಾಶಯಗಳು ಇವೆ, ಅಭಯಾರಣ್ಯ ಇದೆ, ಪ್ರಾಕೃತಿಕ ಸಂಪತ್ತು ಅಪಾರವಾಗಿದೆ. ಹಾಗಾಗಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮೈಸೂರಿನಲ್ಲಿ ಶಾಸಕ ಅನಿಲ್ ಚಿಕ್ಕಮಾದು ಹೇಳಿದ್ದಾರೆ.