ಪ್ರತಿನಿಧಿ ವರದಿ ಸಕಲೇಶಪುರ
ಹಾಸನ-ಮಂಗಳೂರು ನಡುವಿನ ಶಿರಾಡಿಘಾಟ್ನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ದಿನದ 24 ಗಂಟೆಯೂ ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಉಪ ವಿಭಾಗಾಧಿಕಾರಿ ಡಾ.ಶ್ರುತಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು-ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಮಳೆ ಗಣನೀಯವಾಗಿ ಕಡಿಮೆಯಾಗಿದೆ. ಹಾಗೆಯೇ ಭೂ ಕುಸಿತ ಪ್ರಮಾಣವೂ ತಗ್ಗಿದೆ. ಹಾಗಾಗಿ ಜಿಲ್ಲಾಧಿಕಾರಿ ಮಾರ್ಗದರ್ಶನದ ಮೇರೆಗೆ ದಿನದ 24 ಗಂಟೆಯೂ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ ಎಂದರು.
ದೊಡ್ಡತಪ್ಪಲು ಬಳಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದಿತ್ತು. ಅದನ್ನು ಸಂಪೂರ್ಣ ತೆರವು ಮಾಡಲಾಗಿದ್ದು, ರಸ್ತೆಯನ್ನು ಕೊಂಚ ವಿಸ್ತರಣೆ ಮಾಡಲಾಗಿದೆ. ಹಾಗಾಗಿ ಎಲ್ಲ ವಾಹನಗಳೂ ಈ ಮೂಲಕವೇ ಸಂಚಾರ ಮಾಡಬಹುದು. ಒಂದು ತಿಂಗಳಿಂದ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದ್ದ ಕಾರಣ ದೊಡ್ಡತಪ್ಪಲು ಬಳಿ ಪದೇ ಪದೆ ಭೂ ಕುಸಿತ ಉಂಟಾಗಿ, ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ಹಲವು ವಾಹನಗಳ ಮೇಲೂ ಮಣ್ಣು ಕುಸಿದಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇತ್ತೀಚೆಗೆ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ಆದರು ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ತೆರವು ಕಾರ್ಯಾಚರಣೆ ತಂಡ ನಿಯೋಜನೆ ಮಾಡಿದ್ದೇವೆ. ಪೊಲೀಸ್ ಅಧಿಕಾರಿಗಳು, ಎನ್ಎಚ್ಎಐ ತಂಡ ದಿನದ 24 ಗಂಟೆಯೂ ಸ್ಥಳದಲ್ಲಿದ್ದು, ಮೇಲ್ವಿಚಾರಣೆ ವಹಿಸಲಿದೆ ಎಂದು ಮಾಹಿತಿ ನೀಡಿದರು.