ಪ್ರತಿನಿಧಿ ವರದಿ ಮಡಿಕೇರಿ
ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸುವಂತೆ ಸಗಟು ಹಾಗೂ ಚಿಲ್ಲರೆ ರಸಗೊಬ್ಬರ ಮಾರಾಟಗಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆ, ವಿತರಣೆ, ದಾಸ್ತಾನು ಮತ್ತಿತರ ವಿಷಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕೃಷಿಕರಿಂದ ದೂರು ಕೇಳಿ ಬರದಂತೆ ಎಚ್ಚರವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಸೂಚಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ, ಕೃಷಿ ಇಲಾಖೆ ಅಧಿಕಾರಿಗಳು ರಸಗೊಬ್ಬರ ಹಾಗೂ ಬಿತ್ತನೆ ಬೀಜವನ್ನು ಸಮರ್ಪಕವಾಗಿ ಪೂರೈಸಬೇಕು. ಯಾವುದೇ ಕಾರಣಕ್ಕೂ ದೂರುಗಳು ಕೇಳಿಬರಬಾರದು ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ಉತ್ತಮ ಮಳೆಯಾಗಿದ್ದು, ಜಿಲ್ಲೆಗೆ 80,946 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದೆ. ಯೂರಿಯಾ, ಡಿಎಪಿ, ಎಂಒಪಿ, ಕಾಂಪ್ಲೆಕ್ಸ್, ಎಸ್ಎಸ್ಪಿಗೆ ಬೇಡಿಕೆ ಇದ್ದು, ಈಗಾಗಲೇ 15,885 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಮಾಡಲಾಗಿದೆ. 35,062 ಮೆ.ಟನ್ ರಸಗೊಬ್ಬರ ದಾಸ್ತಾನು ಇದೆ ಎಂದರು.
ಭತ್ತ ಹಾಗೂ ಮುಸುಕಿನ ಜೋಳ ಪ್ರಮುಖ ಬೆಳೆಯಾಗಿದ್ದು, ಭತ್ತವನ್ನು ನೀರಾವರಿ ಮತ್ತು ಮಳೆಯಾಶ್ರಿತ ಸೇರಿ 29 ಸಾವಿರ ಹೆಕ್ಟೇರ್ ಗುರಿ ಹೊಂದಲಾಗಿದೆ. 3500 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಗುರಿ ಹೊಂದಲಾಗಿದೆ. 70 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯುವ ಗುರಿ, ಒಟ್ಟು 32,570 ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಕೃಷಿ ಮಾಡುವ ಗುರಿ ಇದೆ ಎಂದು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಭಿತ್ತನೆ ಬೀಜ ಬೇಡಿಕೆ, ಸರಬರಾಜು, ವಿತರಣೆ ಹಾಗೂ ದಾಸ್ತಾನು ಸಂಬಂಧಿಸಿದಂತೆ ಭತ್ತ ಬಿತ್ತನೆ ಬೀಜ 1514 ಕ್ವಿಂಟಾಲ್ ಪೂರೈಕೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ 1871 ಕ್ವಿಂಟಾಲ್ ಭತ್ತ ಬಿತ್ತನೆ ಬೀಜ ವಿತರಣೆ ಗುರಿ ಹೊಂದಲಾಗಿದೆ ಎಂದರು.
ಮುಸುಕಿನ ಜೋಳ ಸಂಬಂಧಿಸಿದಂತೆ 3.76 ಕ್ವಿಂಟಾಲ್ ಬಿತ್ತನೆ ಬೀಜ ಪೂರೈಕೆಯಾಗಿದ್ದು, ಅಗತ್ಯ ದಾಸ್ತಾನು ಇದೆ. 2024ರ ಮುಂಗಾರು ಹಂಗಾಮಿನಲ್ಲಿ ಒಟ್ಟಾರೆ 1913 ಕ್ವಿಂಟಾಲ್ ಭತ್ತ ಮತ್ತು ಮುಸುಕಿನ ಜೋಳದ ಬೆಳೆಗಳ ಬೀಜ ವಿತರಣೆಗೆ ಗುರಿ ನಿಗದಿಪಡಿಸಲಾಗಿದೆ ಎಂದರು.
ಫೋಟೋ 2 ಎಂಡಿಕೆ 06 ; ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆ