ಅಹಮದಾಬಾದ್(ನ.29): ವಿಜಯ್ ಹಜಾರೆ ರಾಷ್ಟ್ರೀಯ ಏಕದಿನ ಟೂರ್ನಿಯಲ್ಲಿ ಸತತ 4ನೇ ಗೆಲುವಿನ ನಿರೀಕ್ಷೆಯಲ್ಲಿರುವ ಕರ್ನಾಟಕ, ಬುಧವಾರ ಬಿಹಾರ ವಿರುದ್ಧ ಸೆಣಸಲಿದೆ. ‘ಸಿ’ ಗುಂಪಿನಲ್ಲಿರುವ ರಾಜ್ಯ ತಂಡ ಟೂರ್ನಿಯಲ್ಲಿ 3 ಪಂದ್ಯಗಳನ್ನಾಡಿದ್ದು, ಹ್ಯಾಟ್ರಿಕ್ ಜಯದೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ.
ಕಳೆದ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ವಿರುದ್ಧ ಲಭಿಸಿದ 6 ವಿಕೆಟ್ ಗೆಲುವು ತಂಡದ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದ್ದು, ಮತ್ತೊಂದು ಜಯದೊಂದಿಗೆ ಅಗ್ರಸ್ಥಾನದಲ್ಲೇ ಮುಂದುವರಿಯುವ ತವಕದಲ್ಲಿದೆ. ಅತ್ತ ಬಿಹಾರ ಆಡಿರುವ 3 ಪಂದ್ಯಗಳಲ್ಲಿ 2ರಲ್ಲಿ ಸೋತಿದ್ದು, ಮತ್ತೊಂದು ಪಂದ್ಯ ರದ್ದಾಗಿದೆ. ಕೇವಲ 2 ಅಂಕ ಸಂಪಾದಿಸಿರುವ ಬಿಹಾರ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಕರ್ನಾಟಕಕ್ಕೆ ಆಘಾತ ನೀಡಿ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆಯುವ ನಿರೀಕ್ಷೆಯಲ್ಲಿದೆ.