ನಂಜನಗೂಡು: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿದ್ದು, ಡಾಂಬರೀಕರಣ ಮಾಡುವಂತೆ ಆಗ್ರಹಿಸಿ ನಾಟಿ ಮಾಡುವ ಮೂಲಕ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯದರ್ಶಿ ನಾಗೇಂದ್ರ ಸ್ವಾಮಿ ಮಾತನಾಡಿ,ದೇವನೂರು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮಳೆ ಬಂದಾಗ ನೀರು ತುಂಬಿಕೊಂಡು ಕೆರೆಯಂತಾಗುತ್ತವೆ. ನಮ್ಮ ನಂಜನಗೂಡು ಶಾಸಕರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರೆ ಸಬೂಬು ಹೇಳುತ್ತಿದ್ದಾರೆ. ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರು ಇಲ್ಲ. ನಮ್ಮ ಕಷ್ಟವನ್ನು ಕೇಳೋರು ಯಾರು ಇಲ್ಲ. ಎಲ್ಲರೂ ಸತ್ತು ನಾಪತ್ತೆಯಾಗಿದ್ದಾರೆ. ಶಾಸಕರು ಗೆದ್ದು ಒಂದು ವರ್ಷವಾಗಿದೆ ಆದರೂ ಕೂಡ ಇತ್ತ ತಿರುಗಿ ನೋಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಗ್ರಾಮಕ್ಕೆ ಭೇಟಿ ನೀಡಿಲ್ಲ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ರಸ್ತೆಯನ್ನು ಡಾಂಬರೀಕರಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ.