ಪ್ರತಿನಿಧಿ ವರದಿ ಮಡಿಕೇರಿ
ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಆದರ್ಶ ಜೀವನ ಮೌಲ್ಯಗಳು ನಮ್ಮೆಲ್ಲರಿಗೂ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ಶುಕ್ರವಾರ ನಡೆದ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಾಬು ಜಗಜೀವನ್ ರಾಂ ಅವರು ಬಿಹಾರದಲ್ಲಿ ಬಡ ಕುಟುಂಬದಲ್ಲಿ ಜನಿಸಿ ಬಾಲ್ಯ ಜೀವನವನ್ನು ಕಷ್ಟದಿಂದಲೇ ಎದುರಿಸಿದವರು. ತಮ್ಮ ಜೀವನದುದ್ದಕ್ಕೂ ಹೋರಾಟದ ಮೂಲಕ ಬೆಳವಣಿಗೆ ಕಂಡು ರಾಜಕೀಯ ಪ್ರವೇಶ ಮಾಡಿ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಅತ್ಯಂತ ಕಿರಿ ವಯಸ್ಸಿನ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ ಸಾಧನೆ ಬಾಬು ಜಗಜೀವನ್ ರಾಂ ಅವರದ್ದಾಗಿದೆ. ಕಾರ್ಮಿಕ ಸಚಿವರಾಗಿ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಹಲವು ಕಾನೂನು ಜಾರಿಗೊಳಿಸುವ ಮೂಲಕ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಕೃಷಿ ಸಚಿವರಾಗಿ ದೇಶದ ಆಹಾರ ಉತ್ಪಾದನೆಯನ್ನು ಅಭಿವೃದ್ಧಿಗೊಳಿಸಿ ಹಸಿರು ಕ್ರಾಂತಿಯ ಹರಿಕಾರನೆಂದು ಜನ ಮನ್ನಣೆಗೆ ಪಾತ್ರರಾಗಿದ್ದಾರೆ. ರೈಲ್ವೆ ಹಾಗೂ ಸಂವಹನ ಸಚಿವರಾಗಿ ಛಾಪು ಮೂಡಿಸಿದ ಕೀರ್ತಿ ಇವರದ್ದು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಸಾಮಾಜಿಕ ನ್ಯಾಯ ಜನ ಸಾಮಾನ್ಯರಿಗೆ ದೊರೆಕಿಸಿ ಕೊಡುವಲ್ಲಿ ಕೇಂದ್ರದ ಹಲವಾರು ಪ್ರಮುಖ ಖಾತೆಗಳ ಸಚಿವರಾಗಿ ಕಾರ್ಯನಿರ್ವಹಿಸಿ ಸಾಬೀತು ಪಡಿಸಿದ್ದಾರೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮಾತನಾಡಿ, ಕೇಂದ್ರ ಸಚಿವ ಸಂಪುಟದಲ್ಲಿ ಸುದೀರ್ಘ 30 ವರ್ಷ ಸಚಿವರಾಗಿ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಶೋಷಿತರ, ನೊಂದವರ ಧ್ವನಿಯಾಗಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದ್ದರು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಾಲಸುಬ್ರಹ್ಮಣ್ಯ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸಪ್ಪ, ತಹಸೀಲ್ದಾರ್ ರಮೇಶ್ ಬಾಬು ಇದ್ದರು.
ಫೋಟೋ 5 ಎಂಡಿಕೆ 04 ; ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನ್ ರಾಂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.